

ದಾವಣಗೆರೆ; ಸೆ.15: ಸುಶಿಕ್ಷಿತ ಸಮಾಜ, ಪ್ರಜ್ಞಾವಂತ ವಕೀಲರ ಸಮುದಾಯವು ಬಲಿಷ್ಠ ಪ್ರಜಾಸತ್ತಾತ್ಮಕ ಸಮಾಜಗಳ ಹೃದಯ ಭಾಗ ಇದ್ದಂತೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ವರಿ ಎನ್.ಹೆಗಡೆ ತಿಳಿಸಿದರು.
ಶುಕ್ರವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ದೇವರಾಜ ಅರಸು ಬಡಾವಣೆಯ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದ ಜಿಲ್ಲಾ ವಕೀಲರ ಭವನದಲ್ಲಿ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಲೋಕ್ ಅದಾಲತ್ ಯಶಸ್ವಿಗೆ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಡೀ ಪ್ರಪಂಚದಲ್ಲಿಯೇ ಅತ್ಯಂತ ದೊಡ್ಡ ಸಂವಿಧಾನವೆಂದರೆ, ಅದು ಭಾರತದ ಸಂವಿಧಾನ. ಮಾನವ ಹಕ್ಕುಗಳು, ಸಮಾನತೆ ಮತ್ತು ಸಂಘರ್ಷ, ಪರಿಹಾರಗಳಂತಹ ಜಾಗತಿಕ ಸಮಸ್ಯೆಗಳಿಗೂ ಸಮರ್ಥವಾದ ಅವಕಾಶಗಳನ್ನು ನೀಡುವ ಸಂವಿಧಾನವಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಪ್ರತಿಬಿಂಬಿಸಲು ಇರುವ ಸದಾವಕಾಶದ ದಿನವೆಂದೇ ಭಾವಿಸುತ್ತೇವೆ, ಕಾನೂನಿನ ದೃಷ್ಟಿಯಲ್ಲಿ ಎಲ್ಲ ಜನರ ಸಮಾನತೆಯನ್ನು ರಕ್ಷಿಸುವ ಮತ್ತು ದೇಶದ ಶಾಂತಿ ಕಾಪಾಡುವ ಅಂಶಗಳು ಭಾರತದ ಸಂವಿಧಾನದಲ್ಲಿವೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ ಕರೆಣ್ಣವರ ಮಾತನಾಡಿ, ಲೋಕ್ ಅದಾಲತ್ನಲ್ಲಿ ದಾಖಲೆ ಪ್ರಮಾಣದಲ್ಲಿ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. ಇದಕ್ಕೆಲ್ಲ ವಕೀಲರ ಸಹಕಾರವೇ ಕಾರಣ. ಕಕ್ಷಿದಾರನಿಗೆ ಮನವೊಲಿಸಿ ರಾಜೀ, ಸಂಧಾನದ ಮೂಲಕ ಎಲ್ಲರೂ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಕಾನೂನು ಸೇವಾ ಪ್ರಾಧಿಕಾರದ ಮೂಲಕ ಲೋಕ್ ಅದಾಲತ್ನಲ್ಲಿ ಇತ್ಯರ್ಥ ಮಾಡಿಕೊಂಡ ಪ್ರಕರಣಗಳ ಕುರಿತು ರಾಜ್ಯ ಉಚ್ಛ ನ್ಯಾಯಾಲಯದ ನ್ಯಾಯಾಧೀಶರು ಪ್ರಶಂಸೆ ವ್ಯಕಪಡಿಸಿದ್ದಾರೆ. ಇನ್ನೂ ಹೆಚ್ಚಿನ ಪ್ರಕರಣಗಳನ್ನು ಬಗೆಹರಿಸಿಕೊಂಡು ಈ ದಾಖಲೆಯನ್ನು ಮುರಿಯಬೇಕು ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್. ಅರುಣ್ ಕುಮಾರ್ ಮಾತನಾಡಿ, ಶಾಸಕಾಂಗ, ನ್ಯಾಯಾಂಗ ಮತ್ತು ಕಾಯಾರ್ಂಗ ಸೇರಿ ಸಂವಿಧಾನದ ಪೀಠಿಕೆ ಓದುವ ದಿನ ಇದಾಗಿದೆ. ಸಂವಿಧಾನದ ಆಶಯಗಳನ್ನು ಅರಿತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಕೆಲಸ ನಾವೆಲ್ಲರೂ ಮಾಡಬೇಕಾಗಿದೆ. ಜಗತ್ತಿನಲ್ಲಿ ಅತಿದೊಡ್ಡ ಪ್ರಜಾಪ್ರಭುತ್ವದೇಶ ನಮ್ಮದು. ಅಹಿಂಸಾತ್ಮಕ ಹಾದಿಯಲ್ಲಿ ಸಾಗುವ ಮೂಲಕ ಏಕತೆಯನ್ನು ಕಾಪಾಡಿಕೊಂಡು ಬರುತ್ತಿದ್ದೇವೆ. ಇದನ್ನು ಇಡೀ ಪ್ರಪಂಚವೇ ಕೊಂಡಾಡಿದೆ, ದೇಶದ ಆಗುಹೋಗುಗಳಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಯ ಮಹತ್ವವನ್ನು, ಆರೋಗ್ಯಪೂರ್ಣ ಪ್ರಜಾಪ್ರಭುತ್ವವನ್ನು ಮುನ್ನಡೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲೆ ಇದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ವಿ.ವಿಜಯಾನಂದ, 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಆರ್.ಎನ್.ಪ್ರವೀಣ್ ಕುಮಾರ್, ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ದಶರಥ, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಹೆಚ್.ಟಿ.ಎಫ್.ಸಿ-1 ನ್ಯಾಯಾಧೀಶರಾದ ಎನ್.ಶ್ರೀಪಾದ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿ.ಜೆ.ಎಂ ಆದ ಶಿವಪ್ಪ ಗಂಗಪ್ಪ ಸಲಗರೆ ಉಪಸ್ಥಿತರಿದ್ದರು.